ಉತ್ತರ ಪ್ರದೇಶದ ರಾಮ್ಪುರ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದ ಟೆಕ್ಕಿಗಳ ಕಾರು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ದೆಹಲಿ ಮೂಲದ ಖಾಸಗಿ ಟೆಕ್ ಕಂಪನಿಯ 12 ಸಿಬ್ಬಂದಿ ಕಂಪನಿಯ ವತಿಯಿಂದ ಆಯೋಜಿಸಲಾಗಿದ್ದ ಪ್ರವಾಸಕ್ಕಾಗಿ ಎರಡು ವಾಹನಗಳಲ್ಲಿ ಉತ್ತರಾಖಂಡದ ರಾಮನಗರದ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನಕ್ಕೆ ತೆರಳುತ್ತಿದ್ದರು. ಈ ವೇಳೆ ಏಳು ಮಂದಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಮತ್ತೊಂದು ವಾಹನದಲ್ಲಿದ್ದ ಐವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಅಪಘಾತದಲ್ಲಿ ಅಭಿಷೇಕ್ ಅಗ್ನಿಹೋತ್ರಿ (30), ಕಾರ್ತಿಕ್ (24), ನೀರಜ್ (24) ಹಾಗೂ ಗುಲ್ಬುದ್ದೀನ್ (35) ಮೃತಪಟ್ಟಿದ್ದಾರೆ. ಕಾರು ಚಾಲನೆ ಮಾಡುತ್ತಿದ್ದ ಅಭಿಷೇಕ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ಕಾರಣ ಕುರಿತು ತನಿಖೆ ನಡೆಸುತ್ತಿದ್ದಾರೆ.










