ಒಡಿಶಾದ ಪುರಿಯಲ್ಲಿ ನಡೆದ ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಸಂಭವಿಸಿ ಓರ್ವ ಭಕ್ತ ಮೃತಪಟ್ಟಿದ್ದು, ಸುಮಾರು 200ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತಪಟ್ಟವರನ್ನು ಕಟಕ್ ಜಿಲ್ಲೆಯ ಅನಿಲ್ ದಾಸ್ ಎಂದು ಗುರುತಿಸಲಾಗಿದೆ.
ಪ್ರತಿ ವರ್ಷದಂತೆ ಈ ಬಾರಿಯೂ ಜಗನ್ನಾಥ ರಥಯಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸಿದ್ದರು. ಜಗನ್ನಾಥ, ಬಲಭದ್ರ ಮತ್ತು ಸುಭದ್ರೆಯ ವಿಗ್ರಹಗಳನ್ನು ಹೊತ್ತ ರಥಗಳು ಪುರಿಯ ಗ್ರ್ಯಾಂಡ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಭಾರೀ ಜನಸಂದಣಿ ಉಂಟಾಗಿ ಕಾಲ್ತುಳಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡ ಭಕ್ತರನ್ನು ತಕ್ಷಣ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಭದ್ರತಾ ವ್ಯವಸ್ಥೆ ಹಾಗೂ ಜನಸಂದಣಿ ನಿಯಂತ್ರಣ ಕ್ರಮಗಳ ಬಗ್ಗೆ ತನಿಖೆ ಮುಂದುವರಿದಿದೆ.










