ಬೆಂಗಳೂರು: ರಾಜಧಾನಿಯಲ್ಲಿ ಬಿಎಂಟಿಸಿ ಬಸ್ಗಳ ಕೊರತೆಯಿಂದ ಪ್ರಯಾಣಿಕರು ಸಾಕಷ್ಟು ಸಮಯ ಬಸ್ಗಾಗಿ ಕಾಯುವ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ. ಮಹಿಳಾ ಪ್ರಯಾಣಿಕರ ಸಂಖ್ಯೆ ಶೇ.150ರಷ್ಟು ಹೆಚ್ಚಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಬಸ್ಗಳನ್ನು ತಕ್ಷಣ ಸೇವೆಗೆ ಸೇರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ಎಕ್ಸ್ (X) ನಲ್ಲಿ ಪೋಸ್ಟ್ ಮಾಡಿದ ತೇಜಸ್ವಿ ಸೂರ್ಯ, ರಸ್ತೆ ಸುರಕ್ಷತೆ ಮತ್ತು ಅಪಘಾತಗಳನ್ನು ನೆಪವೊಡ್ಡಿ ಬಸ್ಗಳ ಸಂಖ್ಯೆಯನ್ನು ಹೆಚ್ಚಿಸದೇ ಇರುವುದು ಸಮಸ್ಯೆಗೆ ಪರಿಹಾರವಲ್ಲ ಎಂದು ಹೇಳಿದ್ದಾರೆ. ಕೆಟ್ಟ ಚಾಲನೆ ಅಥವಾ ಅಪಘಾತಗಳಿಗೆ ಬಿಎಂಟಿಸಿಗೆ ಹೊಸ ಬಸ್ಗಳನ್ನು ಸೇರ್ಪಡೆ ಮಾಡುವ ವಿಚಾರಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಸರ್ಕಾರದಿಂದ ಮಂಜೂರಾಗಿರುವ 4,500 ಬಸ್ಗಳನ್ನು ಸೇವೆಗೆ ಸೇರಿಸಲು ರಾಜ್ಯ ಸರ್ಕಾರ ಏಕೆ ವಿಳಂಬ ಮಾಡುತ್ತಿದೆ ಎಂದು ಪ್ರಶ್ನಿಸಿದ ಅವರು, ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಶೀಘ್ರವೇ ಅನುಮೋದನೆ ನೀಡಿ ಬಸ್ಗಳನ್ನು ರಸ್ತೆಗಿಳಿಸಬೇಕು ಎಂದು ಆಗ್ರಹಿಸಿದ್ದಾರೆ.










