ಕೊಪ್ಪಳ ಜಿಲ್ಲೆಯ ಬಸಾಪೂರ ಸಮೀಪದ ಬಲ್ಡೋಟಾ ಸ್ಟೀಲ್ ಅಂಡ್ ಪವರ್ ಲಿಮಿಟೆಡ್ ಕಾರ್ಖಾನೆ ಮುಂಭಾಗ ನಡೆದ ಪ್ರತಿಭಟನೆ ವೇಳೆ ಕಾರ್ಖಾನೆಗೆ ನುಗ್ಗಲು ಯತ್ನಿಸಿದ ಆರೋಪದ ಮೇಲೆ ಆರು ರೈತ ಹೋರಾಟಗಾರರ ವಿರುದ್ಧ ಪ್ರಕರಣ ದಾಖಲಾಗಿದೆ.
ಮಂಗಳವಾರ (ಜುಲೈ 22) 46ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕಾರ್ಖಾನೆ ಎದುರು ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಆರಂಭದಲ್ಲಿ ಶಾಂತಿಯುತವಾಗಿ ನಡೆದ ಕಾರ್ಯಕ್ರಮ, ಬಳಿಕ ಉದ್ವಿಗ್ನ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾಕಾರರು ಕಾರ್ಖಾನೆ ಆವರಣ ಪ್ರವೇಶಿಸಲು ಯತ್ನಿಸಿದರೆಂದು ಆರೋಪಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಅಲ್ಲಮಪ್ರಭು ಬೆಟ್ಟದೂರು ಸೇರಿದಂತೆ ಒಟ್ಟು ಆರು ಮಂದಿ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು, ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ್ದಾರೆ. ಪ್ರತಿಭಟನೆ ವೇಳೆ ಉಂಟಾದ ಬೆಳವಣಿಗೆಗಳ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.










