ಬೆಂಗಳೂರು: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೂ ಮುನ್ನ ಕಾಂಗ್ರೆಸ್ ಸರ್ಕಾರದ ಮಟ್ಟದಲ್ಲಿ ಹಾಗೂ ಪಕ್ಷದ ಹೈಕಮಾಂಡ್ ಹಂತದಲ್ಲಿ ಕೊನೆ ಕ್ಷಣದವರೆಗೂ ತೀವ್ರ ಚರ್ಚೆ ಮತ್ತು ಕಸರತ್ತು ನಡೆದಿದೆ. ಕೆಲವೇ ಗಂಟೆಗಳ ಅವಧಿಯಲ್ಲಿ ಸಚಿವರು ಹಾಗೂ ಸ್ಪೀಕರ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಮೂರು ಬಾರಿ ಬದಲಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ.
ಸಚಿವ ಸ್ಥಾನ ಬಹುತೇಕ ಖಚಿತ ಎಂದು ಹೇಳಲಾಗಿದ್ದ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರಿಗೆ ಕೊನೆಯ ಕ್ಷಣದಲ್ಲಿ ಅವಕಾಶ ಕೈತಪ್ಪಿದೆ. ಅವರ ಬದಲಿಗೆ ವಿಧಾನ ಪರಿಷತ್ ಸದಸ್ಯ ಭೋಸರಾಜು ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂಬ ಬೆಳವಣಿಗೆ ಇದೀಗ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಕೊನೆಯ ಕ್ಷಣದಲ್ಲಿ ನಡೆದ ಈ ಬದಲಾವಣೆಗೆ ನಿಖರ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ಸಚಿವ ಸಂಪುಟ ವಿಸ್ತರಣೆಯಲ್ಲಿ ಹಲವು ಹಂತಗಳ ಚರ್ಚೆಯ ಬಳಿಕ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಬದಲಾದ ರಾಜಕೀಯ ಲೆಕ್ಕಾಚಾರಗಳ ಹಿನ್ನೆಲೆಯಲ್ಲಿ ಗಾಯತ್ರಿ ಶಾಂತೇಗೌಡ ಅವರ ಹೆಸರು ಕೈಬಿಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬೆಳವಣಿಗೆ ಕಾಂಗ್ರೆಸ್ ಪಕ್ಷದ ಆಂತರಿಕ ವಲಯದಲ್ಲಿ ಕುತೂಹಲ ಮೂಡಿಸಿದೆ.










