ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (BMRDA) ಜಂಟಿಯಾಗಿ ಕೈಗೆತ್ತಿಕೊಳ್ಳಲು ಉದ್ದೇಶಿಸಿದ್ದ ಪ್ರತಿಷ್ಠಿತ ಬಿಡದಿ ಟೌನ್ಶಿಪ್ (ಸ್ಮಾರ್ಟ್ ಸಿಟಿ) ಯೋಜನೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಮೂಲಕ ಯೋಜನೆಗಾಗಿ ಭೂಮಿ ಕಳೆದುಕೊಳ್ಳುವ ಆತಂಕದಲ್ಲಿದ್ದ ರೈತರಿಗೆ ತಾತ್ಕಾಲಿಕ ರಿಲೀಫ್ ದೊರೆತಿದ್ದು, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಹಿನ್ನಡೆಯಾಗಿದೆ.
ಬಿಡದಿ ಟೌನ್ಶಿಪ್ ಯೋಜನೆ ಈಗಾಗಲೇ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಯೋಜನೆಗಾಗಿ ಬಿಡದಿಯ ಮಂಡಲಹಳ್ಳಿ, ವಡೇರಹಳ್ಳಿ ಹಾಗೂ ಕೆಂಪಯ್ಯನಪಾಳ್ಯ ಗ್ರಾಮಗಳ ಭೂಮಿಯನ್ನು ವಶಪಡಿಸಿಕೊಳ್ಳಲು ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಸಂಬಂಧಪಟ್ಟ ರೈತರು ಹೈಕೋರ್ಟ್ ಮೆಟ್ಟಿಲೇರಿದ್ದರು.
ರೈತರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಯೋಜನೆಗೆ ಸಂಬಂಧಿಸಿದಂತೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ್ಯಾಯಾಲಯದ ಈ ಆದೇಶದಿಂದ ಸದ್ಯಕ್ಕೆ ರೈತರಿಗೆ ದೊಡ್ಡ ಮಟ್ಟದ ತಾತ್ಕಾಲಿಕ ಪರಿಹಾರ ದೊರೆತಂತಾಗಿದೆ. ಇದೇ ವೇಳೆ ಬಿಡದಿ ಟೌನ್ಶಿಪ್ ಯೋಜನೆಯ ಮುಂದಿನ ಪ್ರಕ್ರಿಯೆ ಹೇಗೆ ಸಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.










