ಸ್ಯಾಂಡಲ್ವುಡ್ನಲ್ಲಿ ವಿಭಿನ್ನ ಹಾಗೂ ಅದ್ಧೂರಿ ಸಿನಿಮಾವೊಂದು ಸದ್ದಿಲ್ಲದೆ ನಿರ್ಮಾಣವಾಗುತ್ತಿದೆ. ‘ಕಿರಿಕ್ ಪಾರ್ಟಿ’, ‘ಅವನೇ ಶ್ರೀಮನ್ನಾರಾಯಣ’, ‘ಅವತಾರ ಪುರುಷ’ ಸೇರಿದಂತೆ ಹಲವು ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ಮಿಸಿರುವ ಪುಷ್ಕರ್ ಮಲ್ಲಿಕಾರ್ಜುನಯ್ಯ ಇದೀಗ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ವಿಜಯನಗರ ಸಾಮ್ರಾಜ್ಯದ ವೈಭವವನ್ನು ಬೆಳ್ಳಿ ತೆರೆಗೆ ಪರಿಚಯಿಸುವ ಮಹತ್ವಾಕಾಂಕ್ಷೆಯ ಸಿನಿಮಾವನ್ನು ಅವರು ನಿರ್ಮಿಸುತ್ತಿದ್ದಾರೆ.
ಈ ಸಿನಿಮಾದ ಮತ್ತೊಂದು ವಿಶೇಷವೆಂದರೆ ಪುಷ್ಕರ್ ಮಲ್ಲಿಕಾರ್ಜುನಯ್ಯ ಅವರೇ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ. ಇದು ಏಕಾಏಕಿ ಕೈಗೆತ್ತಿಕೊಂಡಿರುವ ಸಿನಿಮಾ ಅಲ್ಲ. ಕಳೆದ ಮೂರ್ನಾಲ್ಕು ವರ್ಷಗಳಿಂದ ಕಥೆ, ಪಾತ್ರಗಳು ಹಾಗೂ ಸಿನಿಮಾಗೆ ಅಗತ್ಯವಿರುವ ಪೂರ್ವ ತಯಾರಿಯಲ್ಲಿ ಅವರು ತೊಡಗಿಸಿಕೊಂಡಿದ್ದರು. ಇದೀಗ ಸಿನಿಮಾ ಸುಮಾರು ಶೇ.70ರಷ್ಟು ಪೂರ್ಣಗೊಂಡಿದೆ ಎನ್ನಲಾಗಿದೆ.
ವಿಜಯನಗರ ಸಾಮ್ರಾಜ್ಯದ ಇತಿಹಾಸ, ವೈಭವ ಮತ್ತು ಆ ಕಾಲಘಟ್ಟವನ್ನು ಅದ್ಧೂರಿಯಾಗಿ ಕಟ್ಟಿಕೊಡುವ ಉದ್ದೇಶದಿಂದ ಚಿತ್ರತಂಡ ಸಾಕಷ್ಟು ತಯಾರಿ ಮಾಡಿಕೊಂಡಿದೆ. ಪಕ್ಕಾ ಪೂರ್ವ ಸಿದ್ಧತೆಯೊಂದಿಗೆ ಸಿನಿಮಾ ಚಿತ್ರೀಕರಣಕ್ಕೆ ಇಳಿದಿರುವ ಪುಷ್ಕರ್ ಅವರ ಈ ಹೊಸ ಪ್ರಯತ್ನ ಸ್ಯಾಂಡಲ್ವುಡ್ನಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಚಿತ್ರದ ಶೀರ್ಷಿಕೆ, ತಾರಾಗಣ ಹಾಗೂ ಬಿಡುಗಡೆಯ ದಿನಾಂಕದ ಬಗ್ಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ಹೊರಬೀಳುವ ನಿರೀಕ್ಷೆಯಿದೆ.










