ಕೌಲಾಲಂಪುರದಿಂದ ಕೊಚ್ಚಿಗೆ ಆಗಮಿಸುತ್ತಿದ್ದ ಬಾಟಿಕ್ ಏರ್ ವಿಮಾನದಲ್ಲಿ ಆತಂಕಕಾರಿ ಘಟನೆ ನಡೆದಿದೆ. ವಿಮಾನ ಲ್ಯಾಂಡಿಂಗ್ಗೆ ಕೆಲವೇ ನಿಮಿಷಗಳು ಬಾಕಿ ಇರುವಾಗ, ಕೇರಳ ಮೂಲದ ಪ್ರಯಾಣಿಕನೊಬ್ಬ ತುರ್ತು ನಿರ್ಗಮನ (Emergency Exit) ದ್ವಾರವನ್ನು ತೆರೆಯಲು ಯತ್ನಿಸಿದ್ದಾನೆ. ಈ ಘಟನೆಯಿಂದ ವಿಮಾನದಲ್ಲಿದ್ದ ಪ್ರಯಾಣಿಕರು ಕೆಲಕಾಲ ಭಯಭೀತರಾಗಿದ್ದರು.
ಆರೋಪಿಯನ್ನು ಕೇರಳದ ಪಾಲಕ್ಕಾಡ್ ಜಿಲ್ಲೆಯ ಕೂತನಾಡ್ ನಿವಾಸಿ 34 ವರ್ಷದ ಜಮ್ಶೀರ್ ಅಥಾನಿಕ್ಕಲ್ ಎಂದು ಗುರುತಿಸಲಾಗಿದೆ. ಆತ ತುರ್ತು ನಿರ್ಗಮನ ದ್ವಾರದ ಪಕ್ಕದ ಕಿಟಕಿ ಸೀಟಿನಲ್ಲಿ ಕುಳಿತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ವಿಮಾನ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಇಳಿಯಲು ಸಿದ್ಧವಾಗುತ್ತಿದ್ದ ವೇಳೆ ಆತ ಏಕಾಏಕಿ ಎದ್ದು ತುರ್ತು ನಿರ್ಗಮನ ಬಾಗಿಲು ತೆರೆಯಲು ಪ್ರಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಆತನನ್ನು ತಡೆಯಲು ಮುಂದಾದ ಕ್ಯಾಬಿನ್ ಸಿಬ್ಬಂದಿ ಹಾಗೂ ಸಹ ಪ್ರಯಾಣಿಕರಿಗೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ವಿಮಾನ ಸುರಕ್ಷಿತವಾಗಿ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ ಆರೋಪಿಯನ್ನು ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕೃತ್ಯದ ಹಿಂದಿನ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.










