ಬೆಂಗಳೂರು: ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಕೆಎಎಸ್ ಅಧಿಕಾರಿ ಹಾಗೂ ಎನ್ಎಚ್ಎಐ ವಿಶೇಷ ಭೂಸ್ವಾಧೀನಾಧಿಕಾರಿ ಬಿ. ಮಲ್ಲಿಕಾರ್ಜುನ ಅವರ ನಿವಾಸಗಳು ಹಾಗೂ ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಂಗಳೂರು, ಬಾಗೇಪಲ್ಲಿ, ಮಾಲೂರು, ಚಿಂತಾಮಣಿ, ಚಿಕ್ಕಬಳ್ಳಾಪುರ ಸೇರಿದಂತೆ 11 ಸ್ಥಳಗಳಲ್ಲಿ ನಡೆದ ಕಾರ್ಯಾಚರಣೆಯಲ್ಲಿ ₹2.53 ಕೋಟಿ ನಗದು ಸೇರಿದಂತೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.
ದಾಳಿ ವೇಳೆ ಮಲ್ಲಿಕಾರ್ಜುನ ಹಾಗೂ ಅವರ ಸಂಬಂಧಿಕರು ಮತ್ತು ಆಪ್ತರ ಹೆಸರಿನಲ್ಲಿ ಹೊಂದಿರುವ 100 ಎಕರೆ ಐದು ಗುಂಟೆ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬಾಗೇಪಲ್ಲಿ ತಾಲೂಕಿನಲ್ಲಿ ಸುಮಾರು 30 ಎಕರೆ ಜಮೀನು ಹೊಂದಿರುವ ಅವರು, 25 ಎಕರೆಯಲ್ಲಿ ಫಾರ್ಮ್ಹೌಸ್ ನಿರ್ಮಿಸಿ ಮಾವು, ಪಪ್ಪಾಯ ಸೇರಿದಂತೆ ವಾಣಿಜ್ಯ ಬೆಳೆಗಳನ್ನು ಬೆಳೆಯುತ್ತಿರುವುದು ಪತ್ತೆಯಾಗಿದೆ. ಜಮೀನಿಗೆ ಸರಕಾರಿ ಮೌಲ್ಯವನ್ನು ಆಧರಿಸಿ ಲೆಕ್ಕ ಹಾಕಲಾಗಿದ್ದು, ಮಾರುಕಟ್ಟೆ ಮೌಲ್ಯ ಇದಕ್ಕಿಂತ ಸುಮಾರು ಮೂರು ಪಟ್ಟು ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ.
ಬ್ಯಾಟರಾಯನಪುರದ ಐಷಾರಾಮಿ ಅಪಾರ್ಟ್ಮೆಂಟ್ ಸೇರಿದಂತೆ ಎರಡು ಮನೆಗಳಲ್ಲಿ ನಡೆಸಿದ ಪರಿಶೀಲನೆಯಲ್ಲಿ ₹2.53 ಕೋಟಿ ನಗದು, ₹15 ಲಕ್ಷ ಮೌಲ್ಯದ ವಾಹನಗಳು, ₹3.10 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹1 ಕೋಟಿ ಬ್ಯಾಂಕ್ ಬ್ಯಾಲೆನ್ಸ್ ಪತ್ತೆಯಾಗಿದೆ. ಹಲವು ವರ್ಷಗಳಿಂದ ಮಲ್ಲಿಕಾರ್ಜುನ ತಮ್ಮ ಸಂಬಳವನ್ನು ಡ್ರಾ ಮಾಡಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟು ₹4,04,50,535 ಮೌಲ್ಯದ ಚರಾಸ್ತಿ ಹಾಗೂ ₹12,95,27,535 ಮೌಲ್ಯದ ಆಸ್ತಿ ಪತ್ತೆಯಾಗಿದ್ದು, ದಾಖಲೆಗಳ ಹೆಚ್ಚಿನ ಪರಿಶೀಲನೆಯನ್ನು ಲೋಕಾಯುಕ್ತ ಅಧಿಕಾರಿಗಳು ಮುಂದುವರಿಸಿದ್ದಾರೆ.










