ಬೆಂಗಳೂರು: ಮುಡಾ ಸೇರಿದಂತೆ ರಾಜ್ಯದ ವಿವಿಧ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ನಿಯಮ ಉಲ್ಲಂಘಿಸಿ ಹಂಚಿಕೆ ಮಾಡಿರುವ ಬದಲಿ ನಿವೇಶನಗಳ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ನಿಯಮಬಾಹಿರವಾಗಿ ಹಂಚಿಕೆಯಾದ ಎಲ್ಲಾ ಬದಲಿ ನಿವೇಶನಗಳ ಹಂಚಿಕೆ ಆದೇಶಗಳನ್ನು ರದ್ದುಪಡಿಸುವಂತೆ ಹಾಗೂ ಈಗಾಗಲೇ ನೋಂದಣಿಯಾಗಿರುವ ನಿವೇಶನಗಳ ಕ್ರಯಪತ್ರ ರದ್ದುಗೊಳಿಸಲು ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡುವಂತೆ ನಗರಾಭಿವೃದ್ಧಿ ಇಲಾಖೆ ನಿರ್ದೇಶನ ನೀಡಿದೆ. ಈ ಸಂಬಂಧ ಮೈಸೂರು ಜಿಲ್ಲಾಧಿಕಾರಿ, ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ಪೌರಾಡಳಿತ ನಿರ್ದೇಶನಾಲಯಕ್ಕೆ ಅಧಿಕೃತ ಪತ್ರ ರವಾನಿಸಲಾಗಿದೆ.
ಏಕಸದಸ್ಯ ವಿಚಾರಣಾ ವರದಿ ಹಾಗೂ ಉನ್ನತ ಮಟ್ಟದ ತಾಂತ್ರಿಕ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಸರ್ಕಾರ ಈ ಕ್ರಮ ಕೈಗೊಂಡಿದೆ. ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಹಂಚಿಕೆ ಮಾಡಿರುವ ಎಲ್ಲಾ ಬದಲಿ ನಿವೇಶನಗಳ ಆದೇಶಗಳನ್ನು ತಕ್ಷಣ ರದ್ದುಪಡಿಸಬೇಕು ಎಂದು ಸೂಚಿಸಲಾಗಿದೆ. ಈಗಾಗಲೇ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ನೋಂದಣಿಯಾಗಿರುವ ನಿವೇಶನಗಳ ಕ್ರಯಪತ್ರ ರದ್ದುಗೊಳಿಸಲು ನ್ಯಾಯಾಲಯದಲ್ಲಿ ದಾವೆ ಹೂಡಬೇಕು. ನೋಂದಣಿ ಆಗದ ಪ್ರಕರಣಗಳಲ್ಲಿ ಸರ್ಕಾರದ ಮುಂದಿನ ನಿರ್ದೇಶನ ಬರುವವರೆಗೆ ಯಾವುದೇ ಹೊಸ ಕ್ರಯಪತ್ರ ನೀಡಬಾರದು ಎಂದು ಸ್ಪಷ್ಟಪಡಿಸಲಾಗಿದೆ.
ಅಕ್ರಮ ಬದಲಿ ನಿವೇಶನಗಳಿಗೆ ಈಗಾಗಲೇ ಖಾತಾ ಮಾಡಿಕೊಟ್ಟಿದ್ದರೆ, ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳು ಕಾನೂನು ಪ್ರಕಾರ ಅದನ್ನು ರದ್ದುಪಡಿಸಬೇಕು ಎಂದು ಸರ್ಕಾರ ಸೂಚಿಸಿದೆ. ಮೈಸೂರು ಮಹಾನಗರ ಪಾಲಿಕೆ, ನಗರಸಭೆ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಇಂತಹ ನಿವೇಶನಗಳಿಗೆ ಖಾತಾ ಮಾಡುವುದನ್ನೂ ತಡೆಹಿಡಿಯುವಂತೆ ನಿರ್ದೇಶಿಸಲಾಗಿದೆ. ಕರ್ನಾಟಕ ನಗರ ಪಾಲಿಕೆಗಳ ಕಾಯ್ದೆ 1976, ಕರ್ನಾಟಕ ಮುನಿಸಿಪಲ್ ಕಾಯ್ದೆ 1961 ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ 1993ರ ಅನ್ವಯ ಮುಂದಿನ ಕ್ರಮ ಕೈಗೊಳ್ಳುವಂತೆ ಆದೇಶಿಸಲಾಗಿದೆ.










