ಬಿಹಾರದಲ್ಲಿ ಬಿಪಿಎಸ್ಸಿ ಪರೀಕ್ಷೆ ವಿಚಾರವಾಗಿ ವಿದ್ಯಾರ್ಥಿಗಳ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದೆ. ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಇಂದು ದಿಢೀರ್ ಮುಖ್ಯಮಂತ್ರಿಗಳ ನಿವಾಸದತ್ತ ಮೆರವಣಿಗೆ ನಡೆಸಿದರು.
ಪಾಟ್ನಾದ ಗಾಂಧಿ ಮೈದಾನದಿಂದ ಆರಂಭವಾದ ವಿದ್ಯಾರ್ಥಿಗಳ ಮೆರವಣಿಗೆಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಈ ವೇಳೆ ಬ್ಯಾರಿಕೇಡ್ ಹಾಕಿ ವಿದ್ಯಾರ್ಥಿಗಳನ್ನು ತಡೆದರು. ಆದರೆ, ಪ್ರತಿಭಟನಾಕಾರರು ಬ್ಯಾರಿಕೇಡ್ ಮುರಿದು ಮುಂದೆ ಹೋಗಲು ಯತ್ನಿಸಿದರು.
ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಜಲಫಿರಂಗಿ ಬಳಸಿದರು. ಕೆಲ ಪ್ರತಿಭಟನಾಕಾರರು ಪೊಲೀಸರತ್ತ ಕಲ್ಲು ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಿಂದಾಗಿ ಡಾಕ್ ಬಂಗಲೆ ಕ್ರಾಸಿಂಗ್ ಸೇರಿದಂತೆ ನಗರದ ಪ್ರಮುಖ ಜಂಕ್ಷನ್ಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಸಿಆರ್ಪಿಎಫ್ ಮತ್ತು ಆರ್ಎಎಫ್ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ.ಬಿಪಿಎಸ್ಸಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ವಿದ್ಯಾರ್ಥಿಗಳು ಪರೀಕ್ಷೆಯನ್ನು ರದ್ದುಪಡಿಸಿ ಮರುಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಜೊತೆಗೆ ಶಿಕ್ಷಕರ ನೇಮಕಾತಿ ಪರೀಕ್ಷೆ ಬಿಪಿಎಸ್ಸಿ 4.0 ಅನ್ನು ಒಂದೇ ಹಂತದಲ್ಲಿ ನಡೆಸಬೇಕು, ನೆಗೆಟಿವ್ ಮಾರ್ಕಿಂಗ್ ರದ್ದುಪಡಿಸಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.
ಬಿಹಾರ ಸಿಬ್ಬಂದಿ ಆಯ್ಕೆ ಆಯೋಗದ ನೇಮಕಾತಿ ಪರೀಕ್ಷೆ ಹಾಗೂ ಸಬ್ಇನ್ಸ್ಪೆಕ್ಟರ್ ನೇಮಕಾತಿಗೆ ಸಂಬಂಧಿಸಿದ ಸಮಸ್ಯೆಗಳನ್ನೂ ಪರಿಹರಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಹಿಂದಿ ಮಾಧ್ಯಮದ ಅಭ್ಯರ್ಥಿಗಳಿಗೆ ನ್ಯಾಯಯುತ ಅವಕಾಶ ನೀಡಬೇಕು ಎಂಬ ಬೇಡಿಕೆಯೂ ಇದೆ.
ವಿದ್ಯಾರ್ಥಿಗಳ ಪ್ರತಿಭಟನೆಗೆ ಖಎಆ ಪಕ್ಷ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿವೆ. ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಕೂಡ ಸರ್ಕಾರ ವಿದ್ಯಾರ್ಥಿಗಳ ಬೇಡಿಕೆಗಳನ್ನು ನಿರ್ಲಕ್ಷಿಸದೆ ಅವರೊಂದಿಗೆ ಮಾತುಕತೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸಲು ಪ್ರತಿ ತಿಂಗಳ ನಾಲ್ಕನೇ ಮಂಗಳವಾರ ಶಿಕ್ಷಣ ಸಂಸ್ಥೆಗಳಲ್ಲಿ ‘ವಿದ್ಯಾರ್ಥಿ ಸಹಯೋಗ್ ಶಿಬಿರ’ ನಡೆಸುವುದಾಗಿ ಬಿಹಾರ ಸರ್ಕಾರ ಘೋಷಿಸಿದೆ.
ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳ ಮುಂದೆ ಹೇಳಿಕೊಳ್ಳಲು ಈ ಶಿಬಿರದಲ್ಲಿ ಅವಕಾಶ ಸಿಗಲಿದೆ. ಜೊತೆಗೆ ಆನ್ಲೈನ್ ಪೋರ್ಟಲ್ ಹಾಗೂ 1100 ಸಹಾಯವಾಣಿ ಮೂಲಕ ದೂರು ದಾಖಲಿಸಿ ಅದರ ಸ್ಥಿತಿಯನ್ನೂ ತಿಳಿದುಕೊಳ್ಳಬಹುದು ಎಂದು ಸರ್ಕಾರ ತಿಳಿಸಿದೆ.









