ಕನ್ನಡ ಚಿತ್ರರಂಗದಲ್ಲಿ ಕ್ರೇಜಿಸ್ಟಾರ್ ಎಂದೇ ಖ್ಯಾತರಾಗಿರುವ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ವಿ. ರವಿಚಂದ್ರನ್ ಅವರು ಇದೀಗ ರಾಜಕೀಯಕ್ಕೆ ಪ್ರವೇಶಿಸುವ ಸಾಧ್ಯತೆ ಕುರಿತು ಚರ್ಚೆ ಆರಂಭವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಾಲ್ಯದ ಗೆಳೆಯರಾಗಿರುವ ರವಿಚಂದ್ರನ್ ಅವರನ್ನು ವಿಧಾನ ಪರಿಷತ್ಗೆ ನಾಮನಿರ್ದೇಶನ ಮಾಡುವ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಚಿತ್ರರಂಗದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿರುವ ರವಿಚಂದ್ರನ್ ಅವರು ನಟನೆಯ ಜೊತೆಗೆ ನಿರ್ದೇಶನ ಹಾಗೂ ನಿರ್ಮಾಣದಲ್ಲೂ ಗುರುತಿಸಿಕೊಂಡಿದ್ದಾರೆ. ಇದೀಗ ಅವರನ್ನು ವಿಧಾನ ಪರಿಷತ್ಗೆ ಕರೆತರುವ ಸಾಧ್ಯತೆ ಕುರಿತು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿದೆ.
ರವಿಚಂದ್ರನ್ ಅವರ ನಾಮನಿರ್ದೇಶನದ ಬಗ್ಗೆ ಅಧಿಕೃತವಾಗಿ ಯಾವುದೇ ಅಂತಿಮ ಘೋಷಣೆ ಹೊರಬಿದ್ದಿಲ್ಲ. ಆದರೆ ಕಾಂಗ್ರೆಸ್ ಸರ್ಕಾರದ ಮಟ್ಟದಲ್ಲಿ ಈ ಕುರಿತು ಸಿದ್ಧತೆ ನಡೆಯುತ್ತಿದೆ ಎಂಬ ಮಾಹಿತಿ ಹರಿದಾಡುತ್ತಿದ್ದು, ಒಂದು ವೇಳೆ ನಾಮನಿರ್ದೇಶನ ಖಚಿತವಾದರೆ ಕನ್ನಡ ಚಿತ್ರರಂಗದ ಮತ್ತೊಬ್ಬ ಪ್ರಮುಖ ವ್ಯಕ್ತಿ ರಾಜಕೀಯ ಅಂಗಳಕ್ಕೆ ಪ್ರವೇಶಿಸಿದಂತಾಗಲಿದೆ.









