ಗ್ರಾಮ ಪಂಚಾಯತಿ ಸೇವೆಗಳಿಗೆ ಸಂಬಂಧಿಸಿದಂತೆ ಗ್ರಾಮೀಣರು ತಮ್ಮ ಅಹವಾಲುಗಳನ್ನು ಸುಲಭವಾಗಿ ದಾಖಲಿಸಲು ಡ್ಯಾಷ್ಬೋರ್ಡ್ ಆಧಾರಿತ ‘ದೂರು ದಾಖಲು–ಇತ್ಯರ್ಥ’ ಆನ್ಲೈನ್ ವ್ಯವಸ್ಥೆ ರೂಪಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ. ಈ ಮೂಲಕ ಗ್ರಾಮೀಣರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ಈ ಸಂಬಂಧ ಇಲಾಖೆಯ ಕಾರ್ಯದರ್ಶಿಯವರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಇ-ಸ್ವತ್ತು, ತೆರಿಗೆ ನಿರ್ಧರಣೆ, ಸಾಮಾಜಿಕ ಅರಣ್ಯೀಕರಣ, ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆರೆಗಳ ನಿರ್ವಹಣೆ, ಕೆರೆ ಒತ್ತುವರಿ ಹಾಗೂ ಜೆಜೆಎಂಗೆ ಸಂಬಂಧಿಸಿದ ದೂರುಗಳನ್ನು ಆನ್ಲೈನ್ನಲ್ಲಿ ದಾಖಲಿಸುವ ವ್ಯವಸ್ಥೆ ಕಲ್ಪಿಸುವಂತೆ ನಿರ್ದೇಶಿಸಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ, ನೈರ್ಮಲ್ಯ, ಗ್ರಾಮೀಣ ರಸ್ತೆಗಳು, ವಿಬಿಜಿ ರಾಮ್ ಜಿ, ಗ್ರಾಮೀಣ ಆಸ್ತಿಗಳ ಸೃಜನೆ ಸೇರಿದಂತೆ ಯಾವುದೇ ಅಹವಾಲನ್ನು ಗ್ರಾಮೀಣರು ದಾಖಲಿಸಬಹುದಾಗಿದೆ. ದೂರುಗಳನ್ನು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಪರಿಶೀಲಿಸಿ, ಕೈಗೊಂಡ ಕ್ರಮದ ಮಾಹಿತಿಯನ್ನು ಆನ್ಲೈನ್ ಮೂಲಕವೇ ನೀಡುವಂತೆ ವ್ಯವಸ್ಥೆ ರೂಪಿಸಲು ಸೂಚಿಸಲಾಗಿದೆ.










