ಬೆಂಗಳೂರು ಮತ್ತು ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಆರಂಭಿಸುವ ನಿಟ್ಟಿನಲ್ಲಿ ಸಿದ್ಧತೆಗಳು ವೇಗ ಪಡೆದುಕೊಂಡಿವೆ. ರೈಲ್ವೆ ಸಚಿವಾಲಯದ ಅಧೀನದಲ್ಲಿರುವ ಸಂಶೋಧನೆ, ವಿನ್ಯಾಸ ಮತ್ತು ಮಾನದಂಡಗಳ ಸಂಸ್ಥೆ (RDSO), ಹಾಸನ–ಮಂಗಳೂರು ರೈಲು ಮಾರ್ಗದ ಸಕಲೇಶಪುರ–ಸುಬ್ರಹ್ಮಣ್ಯ ರಸ್ತೆ ಘಾಟ್ ವಿಭಾಗದಲ್ಲಿ ಯಶಸ್ವಿಯಾಗಿ ಪ್ರಾಯೋಗಿಕ ಸಂಚಾರ ನಡೆಸಿದೆ.
ಆಗಸ್ಟ್ 12ರಿಂದ 19ರವರೆಗೆ ನಡೆದ ಈ ಪರೀಕ್ಷಾರ್ಥ ಸಂಚಾರ ಯಶಸ್ವಿಯಾಗಿರುವುದು ಕರಾವಳಿ ಕರ್ನಾಟಕಕ್ಕೆ ವಂದೇ ಭಾರತ್ ರೈಲು ಸೇವೆ ದೊರೆಯುವ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಘಾಟ್ ಪ್ರದೇಶದ ರೈಲು ಮಾರ್ಗದಲ್ಲಿ ರೈಲಿನ ಸಂಚಾರ ಸಾಮರ್ಥ್ಯ ಹಾಗೂ ಸುರಕ್ಷತಾ ಅಂಶಗಳನ್ನು ಪರಿಶೀಲಿಸುವುದು ಈ ಪ್ರಾಯೋಗಿಕ ಸಂಚಾರದ ಪ್ರಮುಖ ಉದ್ದೇಶವಾಗಿತ್ತು.
ಆದರೆ ಬೆಂಗಳೂರು–ಮಂಗಳೂರು ವಂದೇ ಭಾರತ್ ರೈಲಿನ ಅಂತಿಮ ಮಾರ್ಗ, ಸಂಚಾರದ ಸಮಯ ಹಾಗೂ ಯಾವೆಲ್ಲ ನಿಲ್ದಾಣಗಳಲ್ಲಿ ರೈಲು ನಿಲುಗಡೆ ಮಾಡಲಿದೆ ಎಂಬ ಬಗ್ಗೆ ರೈಲ್ವೆ ಸಚಿವಾಲಯದಿಂದ ಇನ್ನೂ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಅಧಿಕೃತ ವೇಳಾಪಟ್ಟಿ ಪ್ರಕಟವಾದ ಬಳಿಕ ಪ್ರಯಾಣಿಕರಿಗೆ ರೈಲಿನ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ.










