ದಾವಣಗೆರೆ ಉಪಚುನಾವಣೆ: ಕೈ ಪಾಳಯದಲ್ಲಿ ಭುಗಿಲೆದ್ದ ಬಂಡಾಯ, ಬಿಜೆಪಿಯತ್ತ ಮುಸ್ಲಿಂ ಮುಖಂಡರು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರುತ್ತಿದ್ದಂತೆಯೇ ಕಾಂಗ್ರೆಸ್‌ ಪಾಳಯದಲ್ಲಿ ಬಂಡಾಯದ ಬೇಗೆ ತೀವ್ರಗೊಂಡಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್‌ ನೀಡದೆ, ಹೈಕಮಾಂಡ್‌ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್‌ ಅವರಿಗೆ ಮಣೆಹಾಕಿರುವುದು ಮುಸ್ಲಿಂ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ದಶಕಗಳಿಂದ ಪಕ್ಷದ ಬೆನ್ನೆಲುಬಾಗಿದ್ದರೂ ತಮಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡದೆ ಕೇವಲ ‘ವೋಟ್ ಬ್ಯಾಂಕ್’ ಆಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿರುವ ಮುಸ್ಲಿಂ ಯುವಕರು ಹಾಗೂ ಮುಖಂಡರು, ನಗರದ ಪ್ರಮುಖ ವೃತ್ತಗಳಲ್ಲಿ ಕಾಂಗ್ರೆಸ್ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ್ದಾರೆ.

ಟಿಕೆಟ್ ಕೈತಪ್ಪಿದ ಅಸಮಾಧಾನದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲು ನಿರ್ಧರಿಸಿರುವ 20ಕ್ಕೂ ಹೆಚ್ಚು ಮುಸ್ಲಿಂ ಮುಖಂಡರು ಅಚ್ಚರಿಯ ಬೆಳವಣಿಗೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ ಅವರ ಸಮ್ಮುಖದಲ್ಲಿ ಕಮಲ ಪಾಳಯವನ್ನು ಸೇರ್ಪಡೆಗೊಂಡಿದ್ದಾರೆ. ಇದರ ಜೊತೆಗೆ, ಕಾಂಗ್ರೆಸ್‌ನ ಪ್ರಬಲ ನಾಯಕ ಸಾಧಿಕ್ ಪೈಲ್ವಾನ್ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದು, ಚುನಾವಣಾ ಕಣ ಮತ್ತಷ್ಟು ರಣರೋಚಕವಾಗಿದೆ. ಈ ರಾಜಕೀಯ ಧ್ರುವೀಕರಣ ಹಾಗೂ ಅಲ್ಪಸಂಖ್ಯಾತರ ದಿಢೀರ್ ನಡೆ ಮುಂಬರುವ ಉಪಚುನಾವಣೆಯಲ್ಲಿ ಸಾಂಪ್ರದಾಯಿಕ ಮತಗಳ ವಿಭಜನೆಗೆ ಕಾರಣವಾಗಲಿದ್ದು, ಆಡಳಿತ ಪಕ್ಷಕ್ಕೆ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ.

   SHARE  

Facebook
Twitter
Telegram
WhatsApp

   TOP NEWS  

   RECENT NEWS