ಕರ್ನಾಟಕದ ಎಲ್ಲಾ ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನಸಹಿತ ‘ಋತುಸ್ರಾವ ರಜೆ’ (Menstrual Leave) ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು, “ಮಹಿಳೆಯರ ಋತುಸ್ರಾವದ ಆರೋಗ್ಯವು ಸಂವಿಧಾನದ 21ನೇ ವಿಧಿಯಡಿ ಬರುವ ಬದುಕುವ ಹಕ್ಕಿನ ಅವಿಭಾಜ್ಯ ಅಂಗವಾಗಿದೆ” ಎಂದು ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕೂಡಲೇ ನಿಯಮಗಳನ್ನು ರೂಪಿಸಿ, ಖಾಸಗಿ ಕಂಪನಿಗಳು ಹಾಗೂ ಸರ್ಕಾರಿ ಸಂಸ್ಥೆಗಳಲ್ಲಿ ಇದನ್ನು ಜಾರಿಗೊಳಿಸಲು ಮುಂದಾಗಿದೆ.
ಬೆಳಗಾವಿ ಜಿಲ್ಲೆಯ ಹೋಟೆಲ್ ನೌಕರರೊಬ್ಬರು ತಮಗೆ ಋತುಸ್ರಾವದ ಸಮಯದಲ್ಲಿ ರಜೆ ನೀಡುತ್ತಿಲ್ಲ ಎಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಈ ಸೌಲಭ್ಯವು ಕೇವಲ ಸಾಫ್ಟ್ವೇರ್ ಅಥವಾ ದೊಡ್ಡ ಕಂಪನಿಗಳಿಗೆ ಸೀಮಿತವಾಗಬಾರದು ಎಂದು ಹೇಳಿದೆ. ಹೋಟೆಲ್ ಕೆಲಸಗಾರರು, ದಿನಗೂಲಿ ನೌಕರರು ಸೇರಿದಂತೆ 18 ರಿಂದ 52 ವರ್ಷದೊಳಗಿನ ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ಈ ರಜೆ ಅನ್ವಯವಾಗಲಿದೆ. ಋತುಚಕ್ರದ ಸಂದರ್ಭದಲ್ಲಿ ಮಹಿಳೆಯರ ಜೈವಿಕ ಅಗತ್ಯತೆಗಳನ್ನು ಗೌರವಿಸುವುದು ಸಮಾನತೆಯ ಸಂಕೇತವೇ ಹೊರತು ಅದು ವಿಶೇಷ ಸೌಲಭ್ಯವಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.
ಹೈಕೋರ್ಟ್ ಆದೇಶದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್, “ಮಹಿಳೆಯರ ಘನತೆ ಮತ್ತು ಆರೋಗ್ಯದ ದೃಷ್ಟಿಯಿಂದ ಈ ನೀತಿಯನ್ನು ರಾಜ್ಯಾದ್ಯಂತ ಶೀಘ್ರವಾಗಿ ಜಾರಿಗೆ ತರಲಾಗುವುದು” ಎಂದು ತಿಳಿಸಿದ್ದಾರೆ. ಪ್ರಸ್ತುತ ಚಾಲ್ತಿಯಲ್ಲಿರುವ ನೀತಿಯನ್ನು ಬಲಪಡಿಸಲು ‘ಕರ್ನಾಟಕ ಋತುಸ್ರಾವ ರಜೆ ಮತ್ತು ನೈರ್ಮಲ್ಯ ವಿಧೇಯಕ-2025’ ಅನ್ನು ಶೀಘ್ರದಲ್ಲೇ ಶಾಸನಬದ್ಧಗೊಳಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಇನ್ನು ಮುಂದೆ ಯಾವುದೇ ಸಂಸ್ಥೆಯು ಈ ರಜೆ ನೀಡಲು ನಿರಾಕರಿಸಿದರೆ ಅಥವಾ ವೇತನ ಕಡಿತ ಮಾಡಿದರೆ ಅದನ್ನು ಕಾರ್ಮಿಕ ಕಾನೂನಿನ ಉಲ್ಲಂಘನೆ ಎಂದು ಪರಿಗಣಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು.










