ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಶನಿವಾರ ವಿಧಾನಸೌಧದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ಜರುಗಿತು. ಸಭೆಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಸಿಎಂ ಅವರು ಸಾರ್ವಜನಿಕ ಆಡಳಿತ, ಸಾರಿಗೆ, ಆರೋಗ್ಯ ಮತ್ತು ವಿದ್ಯುತ್ ವಲಯಕ್ಕೆ ಸಂಬಂಧಿಸಿದಂತೆ ಸರ್ಕಾರ ತೆಗೆದುಕೊಂಡಿರುವ ಹಲವಾರು ಜನಪರ ನಿರ್ಧಾರಗಳನ್ನು ಪ್ರಕಟಿಸಿದರು. ಇದೇ ವೇಳೆ ರಾಜ್ಯದಲ್ಲಿ ಸಾರಿಗೆ ಸಂಸ್ಥೆಯ ಬಸ್ ಟಿಕೆಟ್ ದರ ಏರಿಕೆಯಾಗಲಿದೆಯೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ದರ ಹೆಚ್ಚಳದ ಕುರಿತು ಮಹತ್ವದ ಸುಳಿವು ನೀಡಿದ್ದಾರೆ.
ಖಾಸಗಿ ಹಾಗೂ ಸರ್ಕಾರಿ ಸಾರಿಗೆ ನಿಗಮಗಳ ಡಿಪೋಗಳಲ್ಲಿನ ಡೀಸೆಲ್ ಬೆಲೆ ವ್ಯತ್ಯಾಸವು ಸದ್ಯ ಸುಮಾರು 40 ರೂಪಾಯಿಗಳಷ್ಟಿದ್ದು, ಇದು ಆತಂಕಕಾರಿ ಸಂಖ್ಯೆಯಾಗಿದೆ ಎಂದು ಸಿಎಂ ತಿಳಿಸಿದರು. ಡೀಸೆಲ್ ದರ ಹೆಚ್ಚಾದಾಗ ಟಿಕೆಟ್ ದರವೂ ಹೆಚ್ಚಾಗಬೇಕು ಎಂಬ ನಿಯಮ ಈ ಹಿಂದೆಯೇ ಇತ್ತಾದರೂ, ಸಾರಿಗೆ ಸಂಸ್ಥೆಗಳ (KSRTC) ಉಳಿವು ಎಷ್ಟು ಮುಖ್ಯವೋ, ಜನಸಾಮಾನ್ಯರ ಹಿತವೂ ಅಷ್ಟೇ ಮುಖ್ಯ ಎಂದು ಅವರು ಪ್ರತಿಪಾದಿಸಿದರು. ಹೀಗಾಗಿ ಸಾರ್ವಜನಿಕರಿಗೆ ಹೊರೆಯಾಗದಂತೆ ಜನರ ಹಿತದೃಷ್ಟಿಯಿಂದ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಮತ್ತು ಈ ಕುರಿತು ಈಗಾಗಲೇ ವರದಿ ಕೇಳಲಾಗಿದೆ ಎಂದು ಸ್ಪಷ್ಟಪಡಿಸಿದರು.
ರಾಜ್ಯದ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸಲು ಸಂಪುಟ ಸಭೆಯು ಬೃಹತ್ ಮೊತ್ತದ ಯೋಜನೆಗಳಿಗೆ ಅನುಮೋದನೆ ನೀಡಿದೆ. ₹235 ಕೋಟಿ ವೆಚ್ಚದಲ್ಲಿ ಒಟ್ಟು 620 ಹೊಸ ಬಸ್ಗಳನ್ನು ಖರೀದಿಸಲಾಗುವುದು. ಇದರಲ್ಲಿ ಗ್ರಾಮೀಣ ಭಾಗದ ಸಂಚಾರಕ್ಕೆ 400 ಬಸ್ಗಳನ್ನು ಹಾಗೂ ವಾಯುವ್ಯ ಸಾರಿಗೆ ನಿಗಮಕ್ಕೆ 220 ಬಸ್ಗಳನ್ನು ಹಂಚಿಕೆ ಮಾಡಲಾಗಿದೆ. ₹112 ಕೋಟಿ ವೆಚ್ಚದಲ್ಲಿ ವಿವಿಧ ಸಾರಿಗೆ ನಿಗಮಗಳ ವ್ಯಾಪ್ತಿಯ 11 ಪ್ರಮುಖ ಸ್ಥಳಗಳಲ್ಲಿ ಎಲೆಕ್ಟ್ರಿಕ್ ಬಸ್ಸುಗಳಿಗಾಗಿ (E-Bus) ಆಧುನಿಕ ಡಿಪೋಗಳನ್ನು ಸ್ಥಾಪಿಸಲಾಗುವುದು. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕು ಕೇಂದ್ರದಲ್ಲಿ ₹30 ಕೋಟಿ ವೆಚ್ಚದಲ್ಲಿ ಸುಸಜ್ಜಿತ ನೂತನ ಬಸ್ ನಿಲ್ದಾಣ ನಿರ್ಮಿಸಲು ಹಸಿರು ನಿಶಾನೆ ನೀಡಲಾಗಿದೆ ಎಂದರು.










