ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯ ಯಶ್ವಾಡಿ ಗ್ರಾಮದಲ್ಲಿ ಶನಿವಾರ ಭೀಕರ ದುರಂತವೊಂದು ಸಂಭವಿಸಿದೆ. ಇಲ್ಲಿನ ಪ್ರಸಿದ್ಧ ಆಂಜನೇಯ (ಮಾರುತಿ) ದೇವಸ್ಥಾನದಲ್ಲಿ ನಿರ್ಮಾಣ ಹಂತದಲ್ಲಿದ್ದ ಸಭಾ ಮಂಟಪದ ಮೇಲ್ಚಾವಣಿ ಏಕಾಏಕಿ ಕುಸಿದು ಬಿದ್ದ ಪರಿಣಾಮ ಆರು ಜನ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾವಣಿ ಕುಸಿದ ರಭಸಕ್ಕೆ ಸುಮಾರು 30 ರಿಂದ 40ಕ್ಕೂ ಹೆಚ್ಚು ಭಕ್ತರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಭೀತಿ ಎದುರಾಗಿದ್ದು, ಸ್ಥಳದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ದೇವಸ್ಥಾನದಲ್ಲಿ ಸದ್ಯ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದರೂ ಸಹ ಗರ್ಭಗುಡಿಯ ಮುಂಭಾಗದಲ್ಲಿ ಹನುಮಂತನಿಗೆ ನಿತ್ಯ ಪೂಜೆಗಳು ಯಥಾಸ್ಥಿತಿಯಾಗಿ ನಡೆಯುತ್ತಿದ್ದವು. ಇಂದು ಶನಿವಾರವಾಗಿದ್ದರಿಂದ ಮಾರುತಿಯ ದರ್ಶನ ಪಡೆಯಲು ಹಾಗೂ ತೀರ್ಥ ಪ್ರಸಾದ ಸ್ವೀಕರಿಸಲು ಗರ್ಭಗುಡಿಯ ಮುಂಭಾಗದಲ್ಲಿ ಭಾರಿ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದರು. ಈ ವೇಳೆ ಗಂಟೆ 2 ರಿಂದ 2:30ರ ಸುಮಾರಿಗೆ ಇಡೀ ಸಭಾ ಮಂಟಪದ ಮೇಲ್ಚಾವಣಿ ಭಕ್ತರ ಮೇಳಲೆಯೇ ಕುಸಿದು ಬಿದ್ದಿದ್ದು, ಈ ಇಡೀ ಭೀಕರ ದುರಂತದ ದೃಶ್ಯಗಳು ದೇವಸ್ಥಾನದ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಘಟನೆ ಸಂಭವಿಸುತ್ತಿದ್ದಂತೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಹಾಗೂ ತುರ್ತು ರಕ್ಷಣಾ ಕಾರ್ಯಾಚರಣೆ ತಂಡಗಳು ಸ್ಥಳಕ್ಕೆ ಧಾವಿಸಿವೆ. ಅವಶೇಷಗಳಡಿ ಸಿಲುಕಿರುವವರನ್ನು ಹೊರತೆಗೆಯಲು ಯುದ್ಧೋಪಾದಿಯಲ್ಲಿ ರಕ್ಷಣಾ ಕಾರ್ಯ ಮುಂದುವರಿದಿದೆ. ಗಾಯಗೊಂಡಿರುವ ಹತ್ತಾರು ಜನರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಕಳವಳ ಮತ್ತು ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ತಿಳಿಸಿ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.










