ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಹಾಗೂ ಮಹಿಳಾ ಮೀಸಲಾತಿ ಕಾಯ್ದೆ ತಿದ್ದುಪಡಿ ಕುರಿತಂತೆ ಮತ್ತೆ ರಾಷ್ಟ್ರೀಯ ರಾಜಕೀಯದಲ್ಲಿ ಚರ್ಚೆ ಜೋರಾಗಿದೆ. ಈ ಬೆಳವಣಿಗೆಯ ನಡುವೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಜುಲೈ 20ರಿಂದ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು 543ರಿಂದ 850ಕ್ಕೆ ಹೆಚ್ಚಿಸುವುದು ಹಾಗೂ ಮಹಿಳಾ ಮೀಸಲಾತಿಗೆ ಸಂಬಂಧಿಸಿದ ಹೊಸ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ನಡೆಯುತ್ತಿವೆ. ಈ ಸಂಬಂಧ ಅಗತ್ಯ ಬೆಂಬಲವನ್ನು ಪಡೆಯಲು ಎನ್ಡಿಎ ಸರ್ಕಾರ ಪ್ರಯತ್ನಿಸುತ್ತಿದೆ ಎನ್ನಲಾಗುತ್ತಿದೆ.
ಈ ಹಿಂದೆ ಇದೇ ವಿಷಯಗಳಿಗೆ ಸಂಬಂಧಿಸಿದ ವಿಧೇಯಕಗಳನ್ನು ಮಂಡಿಸಲು ಸರ್ಕಾರ ಪ್ರಯತ್ನಿಸಿದ್ದರೂ ಅಗತ್ಯ ಬಹುಮತದ ಕೊರತೆಯಿಂದ ಅದು ಯಶಸ್ವಿಯಾಗಿರಲಿಲ್ಲ. ಇದೀಗ ಕೆಲವು ಪಕ್ಷಗಳ ಬೆಂಬಲ ದೊರೆಯುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಈ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಸಂಸತ್ತಿನ ಅಧಿವೇಶನದಲ್ಲಿ ಈ ಕುರಿತು ಏನೆಲ್ಲಾ ಬೆಳವಣಿಗೆಗಳು ನಡೆಯಲಿವೆ ಎಂಬುದರತ್ತ ರಾಜಕೀಯ ವಲಯದ ಗಮನ ನೆಟ್ಟಿದೆ.










