ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಸೋಂಕಿನ ಆತಂಕ ಮುಂದುವರಿದಿದ್ದು, ಮೇ ತಿಂಗಳಿನಿಂದ ಇಲ್ಲಿಯವರೆಗೆ ಸುಮಾರು 46 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಮಳೆಗಾಲದ ಹಿನ್ನೆಲೆ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಆರೋಗ್ಯ ಇಲಾಖೆ ಹಾಗೂ ಪಾಲಿಕೆ ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಿದೆ.
ಡೆಂಗ್ಯೂ ನಿಯಂತ್ರಣಕ್ಕಾಗಿ ಬೆಂಗಳೂರು ಉತ್ತರ ನಗರ ಪಾಲಿಕೆ (BNCC) ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅಗತ್ಯ ನಿರ್ದೇಶನಗಳನ್ನು ನೀಡಿದ್ದಾರೆ. ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ಗಳಲ್ಲಿ ಡೆಂಗ್ಯೂ ಹಾಗೂ ಇತರೆ ಸೊಳ್ಳೆಜನ್ಯ ರೋಗಗಳನ್ನು ತಡೆಗಟ್ಟಲು ವಿಶೇಷ ವಾಹಕ ನಿಯಂತ್ರಣ (Vector Control) ಕಾರ್ಯಾಚರಣೆಗಳನ್ನು ತೀವ್ರಗೊಳಿಸಲಾಗಿದೆ.
ಸೊಳ್ಳೆಗಳ ಉತ್ಪತ್ತಿಯಾಗುವ ಸ್ಥಳಗಳನ್ನು ತೆರವುಗೊಳಿಸುವುದು, ಫಾಗಿಂಗ್, ಲಾರ್ವಾ ನಾಶಕ ಸಿಂಪಡಣೆ ಸೇರಿದಂತೆ ವಿವಿಧ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜ್ವರ, ತಲೆನೋವು, ಮೈ ನೋವು ಅಥವಾ ಡೆಂಗ್ಯೂ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವಂತೆ ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.










