ಪಂಚರಂಗಿ ಫಿಲಂಸ್ ಬ್ಯಾನರ್ನಲ್ಲಿ ನಿರ್ಮಾಣವಾಗಿರುವ ‘ಅಮರ್ಥ’ ಚಿತ್ರದ ಮೋಷನ್ ಪೋಸ್ಟರ್ ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಅನಾವರಣಗೊಂಡಿತು. ಶ್ರೀನಗರ ಕಿಟ್ಟಿ ಹಾಗೂ ಮೇಘನಾ ರಾಜ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರವನ್ನು ಗುರು ಹೆಗ್ಡೆ ಮತ್ತು ವಿನಯ್ ಪ್ರೀತಮ್ ಜಂಟಿಯಾಗಿ ನಿರ್ದೇಶಿಸಿದ್ದು, ಕನ್ಯಾನ ಸದಾಶಿವ ಶೆಟ್ಟಿ ಹಾಗೂ ಗುರು ಹೆಗ್ಡೆ ನಿರ್ಮಾಣ ಮಾಡಿದ್ದಾರೆ. ಹಿರಿಯ ನಟ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಸುಂದರರಾಜ್ ಚಿತ್ರದ ಬಿಡುಗಡೆ ದಿನಾಂಕದ ಮೋಷನ್ ಪೋಸ್ಟರ್ ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗುರು ಹೆಗ್ಡೆ, ಹಿರಿತೆರೆ ಮತ್ತು ಕಿರುತೆರೆಯಲ್ಲಿ ಎರಡು ದಶಕಗಳ ಅನುಭವದ ಬಳಿಕ ಮೊದಲ ಬಾರಿಗೆ ನಿರ್ದೇಶಕರಾಗಿ ಕೆಲಸ ಮಾಡಿರುವುದಾಗಿ ತಿಳಿಸಿದರು. ಎರಡು ವರ್ಷಗಳ ಹಿಂದೆ ಆರಂಭವಾದ ‘ಅಮರ್ಥ’ ಈಗ ಬಿಡುಗಡೆಗೆ ಸಜ್ಜಾಗಿದ್ದು, ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣಪತ್ರ ಪಡೆದಿದೆ ಎಂದು ಹೇಳಿದರು. ಚಿತ್ರ ನಿರ್ಮಾಣದಲ್ಲಿ ಬೆಂಬಲ ನೀಡಿದ ಪ್ರಧಾನ ನಿರ್ಮಾಪಕ ಕನ್ಯಾನ ಸದಾಶಿವ ಶೆಟ್ಟಿಗೆ ಹಾಗೂ ಚಿತ್ರತಂಡದ ಎಲ್ಲ ಸದಸ್ಯರಿಗೆ ಅವರು ಕೃತಜ್ಞತೆ ಸಲ್ಲಿಸಿದರು.
‘ಅಮರ್ಥ’ ಎಂಬ ಶೀರ್ಷಿಕೆಯ ಅರ್ಥವನ್ನು ವಿವರಿಸಿದ ಗುರು ಹೆಗ್ಡೆ, ಜೀವನದಲ್ಲಿ ನಡೆಯುವ ಪ್ರತಿಯೊಂದು ಘಟನೆಗೆ ದೇವರು, ವಿಧಿ ಅಥವಾ ಗ್ರಹಚಾರ ಕಾರಣ ಎಂದು ನಾವು ನಂಬುತ್ತೇವೆ. ಆದರೆ ಅವುಗಳಿಗೂ ಮೀರಿದ ಒಂದು ಅತೀಂದ್ರಿಯ ಶಕ್ತಿ ಇದೆ ಎಂಬ ಸಂದೇಶವನ್ನು ಈ ಸಿನಿಮಾ ಹೇಳಲಿದೆ ಎಂದು ತಿಳಿಸಿದರು. ವಿಭಿನ್ನ ಕಥಾಹಂದರದೊಂದಿಗೆ ಮೂಡಿಬಂದಿರುವ ಈ ಚಿತ್ರ ಪ್ರೇಕ್ಷಕರಲ್ಲಿ ಈಗಾಗಲೇ ಕುತೂಹಲ ಮೂಡಿಸಿದೆ.










